ಬೆಂಗಳೂರು: ರಾಜ್ಯದ ಹಲವೆಡೆ ಬುಧವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ‘ಯೆಲ್ಲೋ ಅಲರ್ಟ್’ ನೀಡಿದೆ.
ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವ ಇದೆ.
ಬೆಂಗಳೂರು ಮತ್ತು ಗ್ರಾಮಾಂತರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಲವು ಪ್ರದೇಶಗಳಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರದಲ್ಲಿ 3 ಸೆಂ.ಮೀ, ಕೊಪ್ಪದಲ್ಲಿ 1 ಸೆಂ.ಮೀ, ಭದ್ರಾವತಿ, ಶಿವಮೊಗ್ಗದಲ್ಲಿ ತಲಾ 1 ಸೆಂ.ಮೀ. ಮಳೆ ದಾಖಲಾಗಿದೆ.