ಬೆಂಗಳೂರು: ರಾಜ್ಯದ ವಿವಿಧೆಡೆ ಗುರುವಾರದಿಂದ ಐದು ದಿನ ತಾಪಮಾನ ಮತ್ತಷ್ಟು ಏರಿಕೆಯಾಗುವ ಜತೆಗೆ, ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಗದಗ, ಧಾರವಾಡ, ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಐದು ದಿನಗಳು ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು, ಈ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಂಭವವಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಬಿಸಿ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಯ ಒಂದೆರಡು ಕಡೆ ಗುರುವಾರದಿಂದ ಐದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ (44 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ. ಅಲ್ಲಿ ಸಾಮಾನ್ಯಕ್ಕಿಂತ 4.1 ಡಿಗ್ರಿ ಸೆಲ್ಸಿಯಸ್ ತಾಪಮಾನ ಏರಿಕೆಯಾಗಿದೆ. ವಿಜಯಪುರದಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಹಾಗೂ ರಾಯಚೂರಿನಲ್ಲಿ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ವರದಿಯಾಗಿದೆ.
ಬೆಂಗಳೂರಿನಲ್ಲಿ ತಾಪಮಾನ 36.6 ಡಿಗ್ರಿ ಸೆಲ್ಸಿಯಸ್ಗೆ ತಲುಪಿದೆ. ಮುಂದಿನ 2 ದಿನಗಳಲ್ಲಿ 37 ಡಿಗ್ರಿ ಸೆಲ್ಸಿಯಸ್ಗೆ ಏರಿಕೆಯಾಗುವ ಸಾಧ್ಯತೆಯಿದೆ ಎಂದಿದೆ.