ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊ*ಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿಗೆ ಇಂದು ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ.
ಈ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈಗಾಗಲೇ ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ದೋಷಿಯೆಂದು ಘೋಷಿಸಿದ್ದು, ಇಂದು ಬೆಳಗ್ಗೆ ಸುಮಾರು 11:30ರ ವೇಳೆಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವುದಾಗಿ ತಿಳಿಸಿದೆ.
ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆ ಘೋಷಿಸಲಿದ್ದಾರೆ.
ದೋಷಿಗಳೆಂದು ತೀರ್ಪು ಹೊರಬಂದ ತಕ್ಷಣ, ಪ್ರಕರಣದ ತನಿಖೆ ನಡೆಸಿದ ಕೇಂದ್ರ ತನಿಖಾ ದಳ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಶಾಸಕ ವಿನಯ್ ಕುಲಕರ್ಣಿ ಸೇರಿ 17 ಮಂದಿಯನ್ನು ಪರಪ್ಪನ ಅಗ್ರಹಾರ ಜೈಲುಗೆ ಸ್ಥಳಾಂತರಿಸಲಾಗಿದೆ.
2016ರ ಜೂನ್ 16ರಂದು ನಡೆದಿದ್ದ ಈ ಹ*ತ್ಯೆಯಲ್ಲಿ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡರನ್ನು ಕೊ*ಲೆ ಮಾಡಲಾಗಿತ್ತು. ಪ್ರಕರಣವು 2019ರಲ್ಲಿ ಸಿಬಿಐಗೆ ವರ್ಗಾಯಿಸಲ್ಪಟ್ಟಿತ್ತು. ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್120(ಬಿ) ಜೊತೆಗೆ 302, 217, 201, 143, 147, 148 ಜೊತೆಗೆ 149, ಶಸ್ತ್ರಾಸ್ತ್ರ ಕಾಯಿದೆ ಸೆಕ್ಷನ್ 25 ಜೊತೆಗೆ 3, 5, 8, 29 ಮತ್ತು ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಸೆಕ್ಷನ್ 13(2) ಜೊತೆಗೆ 13(1)(ಡಿ) ಅಡಿ ಆರೋಪ ಪಟ್ಟಿ ಸಲ್ಲಿಸಿತ್ತು. ವಿನಯ್ ಕುಲಕರ್ಣಿ, ಇಬ್ಬರು ಪೊಲೀಸರು ಸೇರಿದಂತೆ ಒಟ್ಟು 21 ಆರೋಪಿಗಳನ್ನು ಆರೋಪ ಪಟ್ಟಿಯಲ್ಲಿ ಹೆಸರಿಸಲಾಗಿತ್ತು. ಆ ಪೈಕಿ 17 ಮಂದಿ ಮೇಲೆ ಅಪರಾಧ ಸಾಭೀತಾಗಿದೆ. 2016ರ ಜೂನ್ನಲ್ಲಿ ನಡೆದಿದ್ದ ಕೊಲೆ ಪ್ರಕರಣ ಇದಾಗಿದ್ದು 10 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ತೀರ್ಪು ಪ್ರಕಟವಾಗಿದೆ
2016 ಜೂನ್ 15 ರಂದು ಧಾರವಾಡದ ಸಪ್ತಾಪುರದಲ್ಲಿರುವ ಯೋಗೇಶ್ ಗೌಡ ಅವರದ್ದೇ ಒಡೆತನದ ಉದಯ್ ಜಿಮ್ನಲ್ಲಿ ಬೆಳಗಿನ ಜಾವ ಅವರು ದಿನಪತ್ರಿಕೆ ಓದುತ್ತಿದ್ದಾಗ, ಅಲ್ಲಿಗೆ ಬಂದ ದುಷ್ಕರ್ಮಿಗಳ ಗುಂಪೊಂದು ಅವರ ಕಣ್ಣಿಗೆ ಖಾರದ ಪುಡಿ ಎರಚಿ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿತ್ತು.
ಪ್ರಮುಖ ಆರೋಪಿಗಳು: ಸಂತೋಷ್, ಅಶ್ವತ್ಥ, ಸುನೀಲ್ ನಜ್ಮೀರ್ ಅಹ್ಮದ್, ಹರ್ಷಿತ್, ವಿನಯ್ ಕುಲಕರ್ಣಿ , ಶಿವಾನಂದ್, ಚನ್ನಕೇಶವ, ಬಸವರಾಜ್ ಮುತ್ತಗಿ , ಕೀರ್ತಿ ಕುಮಾರ್, ವಿನಾಯಕ್, ದಿನೇಶ್, ಶಹನವಾಜ್, ನೂತನ್, ಹರ್ಷಿತ್, ಚಂದ್ರಶೇಖರ ಇಂಡಿ, ಶಿವಾನಂದ್, ವಿಕಾಸ್, ವಾಸುದೇವ, ವಿಕ್ರಂ