ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಸ್ಥಳೀಯ ಸುದ್ದಿಜಿಲ್ಲಾ ಸುದ್ದಿ

ಧರ್ಮ ಬಸವನಪುರ.

9/22/20251 min read

ಬೆಂ.ಗ್ರಾ.ಜಿಲ್ಲೆ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ-2025 ಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಇಂದು ದೇವನಹಳ್ಳಿ ಟೌನ್ ನ 16 ನೇ ವಾರ್ಡ್ ನಲ್ಲಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಆಯೋಗವು ಸಮೀಕ್ಷಾ ಕಾರ್ಯವನ್ನು ಸೆಪ್ಟೆಂಬರ್‌ 22 ರಿಂದ ಅಕ್ಟೋಬರ್‌ 7 ವರೆಗೆ ಹಮ್ಮಿಕೊಂಡಿದೆ. ಜಿಲ್ಲೆಯಲ್ಲಿ ಸಮೀಕ್ಷೆಗಾಗಿ 3286 ಗಣತೀದಾರರನ್ನು 194 ಮೇಲ್ವಿಚಾರಕರನ್ನು ನೇಮಿಸಲಾಗಿದ್ದು ಸಮೀಕ್ಷೆ ಸುಗಮವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಆಧಾರ್ ಕಾರ್ಡ್ ಕಡ್ಡಾಯ

ಸಮೀಕ್ಷೆಯಲ್ಲಿ ಸುಮಾರು 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಗಣತಿದಾರರು ಮೊಬೈಲ್ ಆಪ್ ಮೂಲಕ ಮನೆ-ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸುತ್ತಾರೆ. ಸಾರ್ವಜನಿಕರು ಆಧಾರ್ ಕಾರ್ಡ್ ಇ-ಕೈವೈಸಿ ಕಡ್ಡಾಯವಾಗಿ ಮಾಡಿರಬೇಕು, ಇ-ಕೆವೈಸಿ ಮಾಡಿರುವ ಆಧಾರ್ ಕಾರ್ಡ್ ನ ಮೊಬೈಲ್ ನಂಬರ್ ಗೆ ಒಟಿಪಿ ಬರುತ್ತದೆ. ಇ-ಕೆವೈಸಿ ಮಾಡಿಸದವರು ಹತ್ತಿರದ ಗ್ರಾಮ ಒನ್ ಸೆಂಟರ್ ಗಳಿಗೆ ಭೇಟಿ ನೀಡಿ ಇ- ಕೆವೈಸಿ ಮಾಡಿಸಿ. ಇದರಿಂದ ಸಮೀಕ್ಷೆಗೆ ದತ್ತಾಂಶ ಸಂಗ್ರಹಿಸಲು ಅನುಕೂಲವಾಗಲಿದೆ ಎಂದರು. ಗಣತೀದಾರರು ಕೇಳುವಂತಹ ಪ್ರಶ್ನೆಗಳಿಗೆ ಸಾರ್ವಜನಿಕರು ಸರಿಯಾಗಿ ಸಮರ್ಪಕ ಉತ್ತರ ನೀಡಿ ಸಮೀಕ್ಷೆ ಯಶಸ್ಸಿಗೆ ಸಹಕರಿಸಬೇಕು ಎಂದರು.

ಜನರ ಶೈಕ್ಷಣಿಕ ಮಟ್ಟ, ಆರ್ಥಿಕ ಸ್ಥಿತಿ, ಜಾತಿ, ಉಪಜಾತಿ, ಕೌಶಲ್ಯ ಅಗತ್ಯತೆಗಳು ಮತ್ತು ಇತರೆ ಸಾಮಾಜಿಕ ಅಂಶಗಳನ್ನು ದಾಖಲಿಸಿ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಧಾರವನ್ನು ಸೃಷ್ಟಿಸುವುದು. ಈ ದತ್ತಾಂಶ ಸಂಗ್ರಹಣೆಯು ರಾಜ್ಯದ ಅಭಿವೃದ್ಧಿಗೆ ಮತ್ತು ಸಮಾಜದ ಎಲ್ಲಾ ವರ್ಗಗಳಿಗೆ ಸಮಾನ ಅವಕಾಶಗಳನ್ನು ಒದಗಿಸುವುದು ಸಮೀಕ್ಷೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಸಹಾಯವಾಣಿ ಸಂಪರ್ಕಿಸಿ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿ ಜಿಲ್ಲೆಯಲ್ಲಿ 05 (Help Line) ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿರುತ್ತವೆ. ಜಿಲ್ಲಾ ಹಿಂದುಳಿದ ವರ್ಗಗಳ ಕಛೇರಿ ದೂರವಾಣಿ ಸಂಖ್ಯೆ 080-22449999,

ದೇವನಹಳ್ಳಿ-9036858653, ದೊಡ್ಡಬಳ್ಳಾಪುರ-8884579990, ಹೊಸಕೋಟೆ-080-27931104, ನೆಲಮಂಗಲ-9740100884. ಸಮೀಕ್ಷೆಯ ಕುರಿತು ಏನಾದರೂ ಸಂದೇಹಗಳಿದ್ದಲ್ಲಿ ಸಹಾಯವಾಣಿಯನ್ನು ಬೆಳಿಗ್ಗೆ 7.00 ರಿಂದ ಸಂಜೆ 7.00 ರವರೆಗೆ ಸಂಪರ್ಕಿಸಿ.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಮುನಿಕೃಷ್ಣ, ಉಪಾಧ್ಯಕ್ಷರಾದ ರವೀಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಯಶ್ರೀ ಹೆಂಡೇಗಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನಪ್ಪ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಲಕ್ಷ್ಮಿಕಾಂತ್, ತಹಶೀಲ್ದಾರ್ ಅನಿಲ್ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.