ವರ್ತೂರು-ಗುಂಜೂರು ರಸ್ತೆ ಅಗಲೀಕರಣ ಕಾಮಗಾರಿ ವಿಳಂಬ: ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಪರಿಶೀಲನೆ
ಸ್ಥಳೀಯ ಸುದ್ದಿ


ವರ್ತೂರು-ಗುಂಜೂರು ರಸ್ತೆ ಅಗಲೀಕರಣ ಕಾಮಗಾರಿ ವಿಳಂಬ: ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಪರಿಶೀಲನೆ
ಮಹದೇವಪುರ: ವರ್ತೂರು ಕೆರೆ ಕೋಡಿಯಿಂದ ವಿನಾಯಕ ಥಿಯೇಟರ್ವರೆಗೆ ನಿರ್ಮಿಸಲು ಉದ್ದೇಶಿಸಿರುವ ಯೋಜನೆಯ ವಿಳಂಬಕ್ಕೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಕ್ಷೇತ್ರದ ವರ್ತೂರು ರಸ್ತೆ ಕೆಆರ್ಡಿಸಿಎಲ್ ಅಗಲೀಕರಣ ವಿಳಂಬವಾಗಿರುವುದಕ್ಕೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ, ಶೀಘ್ರದಲ್ಲಿ ರಸ್ತೆ ಕಾಮಗಾರಿ ಪ್ರಾರಂಭ ಮಾಡಿ ಜೊತೆಗೆ ಮೆಟ್ರೊ ಲೈನ್ ಗೂ ಸಹ ಈಗಲೇ ಪ್ಲಾನ್ ಮಾಡಿ ಎಂದು ಸೂಚಿಸಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ವರ್ತೂರು ನಾಗರಿಕರ ಹಿತರಕ್ಷಣಾ ವೇದಿಕೆಯು ಎಲಿವೇಟೆಡ್ ಕಾರಿಡಾರ್ ಯೋಜನೆಯಿಂದಾಗುವ ತೊಂದರೆಗಳ ಬಗ್ಗೆ ಮಾಹಿತಿ ನಿಡಿದ್ದಾರೆ. ಬಹು ದಿನಗಳ ಬೇಡಿಕೆಯಾಗಿದ್ದ ಈ ಕಾಮಗಾರಿಯಿಂದ ಸರ್ಜಾಪುರ ಕಡೆ ಹೊಸೂರು ಮಾರ್ಗವಾಗಿ ತಮಿಳುನಾಡು ಕಡೆಗೆ ಸಾಗುವ ವಾಹನಗಳು ಹಾಗೂ ಸ್ಥಳೀಯ ವಿದ್ಯಾಸಂಸ್ಥೆಗಳಿಗೆ ತೆರಳುವ ವಿದ್ಯಾರ್ಥಿಗಳು, ಐಟಿಬಿಟಿ, ಖಾಸಗಿ ಸಂಸ್ಥೆ ಇನ್ನಿತರ ಉದ್ಯೋಗಿಗಳು ಸರಿಯಾದ ಸಮಯಕ್ಕೆ ತಲುಪದೆ ಪ್ರತಿನಿತ್ಯ ಕಿರಿಕಿರಿ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗಳನ್ನು ಮನಗಂಡು ಆಗಿನ ಶಾಸಕ ಅರವಿಂದ ಲಿಂಬಾವಳಿ ಅವರು ರಸ್ತೆ ಆಗಲೀಕರಣ ಮತ್ತು ಅಭಿವೃದ್ಧಿಗೆ ರೂಪುರೇಷೆ ಸಿದ್ಧಪಡಿಸಿದ್ದರು. ಭೂಸ್ವಾಧೀನ ಮತ್ತು ಇನ್ನಿತರ ಕಾರಣಗಳಿಂದ ಕಾರ್ಯಗತವಾಗಲು ವಿಳಂಬವಾಗಿತ್ತು. ಈಗ ಕಾಮಗಾರಿಗೆ ವೇಗ ದೊರೆಯಲಿದೆ ಎಂದರು.
ಯಾವುದೇ ಮೂಲಸೌಕರ್ಯ ಯೋಜನೆಯನ್ನು ಪ್ರಾರಂಭಿಸುವ ಮೊದಲು ಸ್ಥಳೀಯರು ಮತ್ತು ತಜ್ಞರೊಂದಿಗೆ ಸಮಾಲೋಚನೆ ನಡೆಸಬೇಕು. ಸುಸ್ಥಿರ ಅಭಿವೃದ್ಧಿಯ ದೃಷ್ಟಿಯಿಂದ ಮೆಟ್ರೋ ಮತ್ತು ಉಪನಗರ ರೈಲು ಯೋಜನೆಗಳಂತಹ ಸಮೂಹ ಸಾರ್ವಜನಿಕ ಸಾರಿಗೆಗೆ ಆದ್ಯತೆ ನೀಡಬೇಕು. ಗ್ರಾಮದ ಪರಿಸರ ಮತ್ತು ಪರಂಪರೆಗೆ ಧಕ್ಕೆಯಾಗದಂತೆ ಯೋಜನೆಗಳನ್ನು ರೂಪಿಸಬೇಕು ಮತ್ತು ಯಾವುದೇ ಯೋಜನೆಯ ಡಿಪಿಆರ್ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.
ಗ್ರಾಮಸ್ಥರಿಂದ ಸಾಕಷ್ಟು ದೂರುಗಳು ಬಂದಿದ್ದು ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ಕಾರ್ಯದರ್ಶಿಗಳು ಎಲ್ಲಾ ಸಮಸ್ಯೆ ಗಳ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳ ಸಭೆ ಕರೆದು ಸಮಸ್ಯೆಗಳನ್ನು ಬಗೆಹರಿಸುವದಾಗಿ ಭರವಸೆ ನೀಡಿದರು.
ಈ ವೇಳೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕೆಆರ್ಐಡಿಎಲ್ ಎಂಡಿ ಲಿಂಗಮೂರ್ತಿ, ಬೆಂಗಳೂರು ನಗರ ಜಿಲ್ಲಾಧಿಕಾರಿ, ಸ್ಥಳೀಯ ಮುಖಂಡರಾದ ಮನೋಹರ ರೆಡ್ಡಿ, ನಟರಾಜ್, ಕುಪ್ಪಿ ಮಂಜುನಾಥ್, ಮಹೇಂದ್ರ ಮೋದಿ, ಜಗದೀಶ್, ಸುನೀಲ್ ಮತ್ತಿತರದಿದ್ದರು.