ಕುಂದಾಣ ಬೆಟ್ಟದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ:

ಸ್ಥಳೀಯ ಸುದ್ದಿಜಿಲ್ಲಾ ಸುದ್ದಿ

ಧರ್ಮ ಬಸವನಪುರ.

9/27/20251 min read

ಬೆಂ.ಗ್ರಾ.ಜಿಲ್ಲೆ: ಪ್ರತಿಯೊಬ್ಬರು ಗಿಡ-ಮರಗಳನ್ನು ಬೆಳೆಸುವ ಜತೆಗೆ ಪರಿಸರ ಸಮತೋಲನಕ್ಕಾಗಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ಜವಾಬ್ದಾರಿ ಇದ್ದು, ನಾವು ಪರಿಸರ ಸಮತೋಲನ ಕಾಪಾಡುವದರಿಂದ ಉತ್ತಮ ಆರೋಗ್ಯ, ಶುದ್ಧ ವಾತಾವರಣ ಪಡೆಯಲು ಸಾಧ್ಯವಾಗುತ್ತದೆ ಎಂದು ಸಚಿವ ಕೆ.ಎಚ್. ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಬೆಟ್ಟದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮ ಮತ್ತು ಸುಸ್ಥಿರ ಪರಿವರ್ತನೆ ವಾಕ್ಯದೊಂದಿಗೆ 'ಟ್ರಕ್ಕಿಂಗ್, ಸಸಿ ನೆಡುವ ಹಾಗೂ ಸ್ವಚ್ಛತಾ ಹೀ ಸೇವಾ ಆಂದೋಲನ' ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಚ್ಛತೆ ಹಾಗೂ ಗಿಡ-ಮರಗಳು ಬೆಳೆಸೋದು ಕೇವಲ ಸರ್ಕಾರದ ಕೆಲಸ ಅಷ್ಟೇ ಅಲ್ಲ, ಸಾರ್ವಜನಿಕರ ಭಾಗವಹಿಸುವಿಕೆ ಅಗತ್ಯವಾಗಿದೆ. ಪರಿಸರ ಬೆಳೆಸುವ ಕಾರ್ಯದಿಂದ ರೋಗರುಜಿನಗಳು ತಡೆದು ಆಸ್ಪತ್ರೆಗೆ ಹೋಗುವದರಿಂದ ದೂರ ಉಳಿಯಲು ಸಾಧ್ಯವಾಗುತ್ತದೆ ಎಂದು ಸಾರ್ವಜನಿಕರಲ್ಲಿ ಪರಿಸರ ಅರಿವು ಮೂಡಿಸಿದರು.

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಚಾರಣಕ್ಕೆ ಅನುಕೂಲಕರ ವಾತಾವರಣವನ್ನು ಜಿಲ್ಲಾಡಳಿತ ಕಲ್ಪಿಸುತ್ತಿದ್ದು, ಸಾರ್ವಜನಿಕರು ಪ್ರವಾಸಿ ತಾಣಗಳಿಗೆ ಭೇಟಿ ನೀಡಿದಾಗ ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಪ್ರಕೃತಿಯ ಸೌಂದರ್ಯ ಹಾಗೂ ಶುದ್ಧ ವಾತಾವರಣವನ್ನು ಆಸ್ವಾದಿಸಬೇಕು ಎಂದರು.

ಪರಿಸರ ಸಂರಕ್ಷಣೆ ಜತೆಗೆ ಪಕ್ಷಿಗಳಿಗೆ ಆಹಾರವಾಗುವಂತ ಹಣ್ಣು ಬಿಡುವ ಗಿಡ-ಮರ ಹೆಚ್ಚಾಗಿ ನೆಟ್ಟು, ಬೆಳೆಸುವ ಮೂಲಕ ಆರೋಗ್ಯಕರ ಪ್ರಕೃತಿ ನಿರ್ಮಿಸಿ ಪರಿಸರ ಸಮತೋಲನ ಕಾಪಾಡಬೇಕು ಎಂದು ಸಚಿವರು ಕರೆ ನೀಡಿದರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಸೋದ್ಯಮ ದಿನಾಚರಣೆ ಹಾಗೂ ಸ್ವಚ್ಛತೆಯೇ ಸೇವೆ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ಇದರ ಭಾಗವಾಗಿ ಜಿಲ್ಲೆಯಾದ್ಯಂತ ಕೆರೆ, ಕುಂಟೆ, ಕಲ್ಯಾಣಿಗಳು ಹಾಗೂ ಗ್ರಾಮದ ಸ್ವಚ್ಛತೆ ಜತೆಗೆ ಸಸಿ ನೆಡುವ ಕಾರ್ಯದಲ್ಲಿ ಜಿ.ಪಂ ಹಾಗೂ ಗ್ರಾ.ಪಂ ಪೌರಕಾರ್ಮಿಕರು ಬಹು ಉತ್ಸುಕತೆಯಿಂದ ಕಾರ್ಯಪ್ರವೃತ್ತರಾಗಿದ್ದಾರೇ. ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ವಾತಾವರಣದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಇದಕ್ಕೂ ಮುನ್ನ ಬೆಟ್ಟದ ಸುತ್ತಮುತ್ತಲಿನ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ ಸಸಿಗಳನ್ನು ನೆಡಲಾಯಿತು.

ಕಾರ್ಯಕ್ರಮದಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧ್ಯಕ್ಷರಾದ ಶಾಂತಕುಮಾರ್, ದೇವನಹಳ್ಳಿ ತಾಲೂಕು ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಜಗನ್ನಾಥ, ಕುಂದಾಣ ಗ್ರಾ.ಪಂ ಅಧ್ಯಕ್ಷರಾದ ವಿಜಯಮ್ಮ, ದೇವನಹಳ್ಳಿ ಪುರಸಭೆ ಅಧ್ಯಕ್ಷರಾದ ಡಿ.ಎಂ ಮುನಿಕೃಷ್ಣ, ಜಿ.ಪಂ ಮಾಜಿ ಸದಸ್ಯ ಮಂಜುನಾಥ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ಪ್ರೀತಿ, ದೇವನಹಳ್ಳಿ ತಹಶೀಲ್ದಾರ್ ಅನೀಲ್ ಎಂ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.